ನವದೆಹಲಿ: ಪೆಟ್ರೋಲ್, ಡೀಸೆಲ್ ಸೇರಿದಂತೆ ಇಂಧನಗಳ ಮೇಲಿನ ಎಕ್ಸೈಸ್ ಸುಂಕವನ್ನು 2014ರಲ್ಲಿ ಮನಮೋಹನ್ ಸಿಂಗ್ ನೇತ್ರತ್ವದ ಯುಪಿಎ ಸರ್ಕಾರ ಇದ್ದಾಗ ಎಷ್ಟಿತ್ತೋ ಅದೇ ಮಟ್ಟಕ್ಕೆ ಇಳಿಸಬೇಕು ಎಂದು ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಆಗ್ರಹಿಸಿದ್ದಾರೆ.
ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋತ ಬಳಿಕ ಪ್ರಧಾನಿ ನರೇಂದ್ರ ಮೋದಿಯವರು ಇಂಧನಗಳ ಮೇಲಿನ ಎಕ್ಸೈಸ್ ಸುಂಕವನ್ನು ಇಳಿಸಿದ್ದು, ಅದನ್ನಿಗ 2014ರ ಮಟ್ಟಕ್ಕೆ ಕಡಿತಗೊಳಿಸಲಿದ್ದಾರೆ ಎಂದು ಅವರು ವ್ಯಂಗ್ಯವಾಡಿದ್ದಾರೆ.
ಇಂಧನ ದರ ಏರಿಕೆಗೆ ಸಂಬಂಧಿಸಿ ಟ್ವೀಟ್ ಮಾಡಿರುವ ಅವರು, ‘ಮೋದಿಯವರಿಗೆ ನಿಜವಾಗಿಯೂ ಜನರಿಗೆ ಅನುಕೂಲ ಮಾಡಿಕೊಡಬೇಕೆಂಬ ಮನಸ್ಸಿದ್ದರೆ ಇಂಧನಗಳ ಮೇಲಿನ ಎಕ್ಸೈಸ್ ಸುಂಕವನ್ನು 2014ರಲ್ಲಿ ಯುಪಿಎ ಸರ್ಕಾರ ಇದ್ದಾಗ ಎಷ್ಟಿತ್ತೋ ಅದೇ ಮಟ್ಟಕ್ಕೆ ಇಳಿಸಲಿ ಎಂದು ಅವರು ಸವಾಲು ಹಾಕಿದ್ದಾರೆ.

2014ರ ಮಟ್ಟಕ್ಕೆ ಇಳಿಸಿದರೇ ಪೆಟ್ರೋಲ್ ಹಾಗೂ ಡೀಸೆಲ್ ದರ ಇನ್ನೂ ₹18ರಷ್ಟು ಕಡಿಮೆಯಾಗಲಿದೆ. ಬಹುಶಃ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸೋಲನುಭವಿಸಿದ ಬಳಿಕ ಅವರು ಆ ನಿರ್ಧಾರ ಕೈಗೊಳ್ಳಬಹುದು’ ಎಂದು ಕಟಕಿಯಾಡಿದ್ದಾರೆ
ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಎಕ್ಸೈಸ್ ಸುಂಕವನ್ನು ಕ್ರಮವಾಗಿ ₹5 ಮತ್ತು ₹10ರಷ್ಟು ಕಡಿತಗೊಳಿಸಿರುವುದಾಗಿ ಕೇಂದ್ರ ಸರ್ಕಾರ ಬುಧವಾರ ಘೋಷಿಸಿತ್ತು. ಆ ಬಳಿಕ ಕರ್ನಾಟಕವೂ ಸೇರಿದಂತೆ ಹಲವು ಬಿಜೆಪಿ ಅಡಳಿತದ ರಾಜ್ಯಗಳೂ ತೆರಿಗೆ ಕಡಿತ ನಿರ್ಧಾರ ಪ್ರಕಟಿಸಿವೆ