
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ನಲ್ಲಿ ಟಿಕೆಟ್ಗಾಗಿ ಅಂತಿಮ ಹಂತದ ಪೈಪೋಟಿ ತೀವ್ರಗೊಂಡಿದ್ದು ಮಂಡ್ಯ ಕ್ಷೇತ್ರದಿಂದ ಸಚಿವ ಎಸ್.ಟಿ. ಸೋಮಶೇಖರ್ ವಿಶೇಷಾಧಿಕಾರಿಯಾಗಿದ್ದ ದಿನೇಶ್ ಗೂಳಿಗೌಡ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಮುಂದಾಗಿದೆ.
ಈ ಹಿಂದೆ ಕಾಂಗ್ರೆಸ್ನಲ್ಲಿದ್ದ ಇವರು ಆಪರೇಷನ್ ಕಮಲದ ಮೂಲಕ ಎಸ್ಟಿ ಸೋಮಶೇಖರ್ ಬಿಜೆಪಿ ಸೇರ್ಪಡೆಯಾದ ಸಂದರ್ಭದಲ್ಲಿ ಕಾಂಗ್ರೆಸ್ ತೊರೆದು ಎಸ್ಟಿ ಸೋಮಶೇಖರ್ ಅವರ ವಿಶೇಷಾಧಿಕಾರಿಯಾಗಿ ಸೇರ್ಪಡೆಯಾಗಿದ್ದರು. ಇದೀಗ ಹುದ್ದೆಗೆ ರಾಜೀನಾಮೆ ನೀಡಿದ್ದು ಕಾಂಗ್ರೆಸ್ನಿಂದ ಕಣಕ್ಕಿಳಿಯಲಿದ್ದಾರೆ ಎಂದು ತಿಳಿದುಬಂದಿದೆ. ಆದರೆ ದಿನೇಶ್ ಗೂಳಿಗೌಡರಿಗೆ ಟಿಕೆಟ್ ನೀಡುವುದು ಸ್ಥಳೀಯ ಕಾಂಗ್ರೆಸ್ ಮುಖಂಡರ ಅಸಮಾಧಾನಕ್ಕೆ ಕಾರಣವಾಗಿದೆ.
ತನ್ನ ಆಪ್ತ ಸಹಾಯಕನ ಟಿಕೆಟ್ ಗೆ ಭರ್ಜರಿ ಲಾಬಿ ಸಚಿವರ ಕಡೆಯಿಂದ ನಡೆಯುತ್ತಿದೆ ಎಂದು ತಿಳಿದು ಬಂದಿದೆ.
ಈ ನಡುವೆ ಅಧಿಕೃತ ಅಭ್ಯರ್ಥಿ ಎಂದುಕೊಂಡಿದ್ದ ರಾಮಕೃಷ್ಣಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕರೆ ಮಾಡಿ ದಿನೇಶ್ ಗೂಳಿಗೌಡ ಅವರಿಗೆ ಟಿಕೆಟ್ ಕೊಡಲಾಗುವುದು ಎಂದು ಹೇಳಿದ್ದಾರೆ. ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯರನ್ನು ಒಪ್ಪಿಸಲು ಮಾಜಿ ಶಾಸಕ ಚಲುವರಾಯಸ್ವಾಮಿ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ ಎನ್ನುತ್ತಿವೆ ಕಾಂಗ್ರೆಸ್ ಮೂಲಗಳು.
ಡಿಸೆಂಬರ್ 10ರಂದು ವಿಧಾನ ಪರಿಷತ್ ಚುನಾವಣೆ ನಡೆಯಲಿದ್ದು ಕಾಂಗ್ರೆಸ್ನಲ್ಲಿ ಅಭ್ಯರ್ಥಿ ಆಯ್ಕೆಗಾಗಿ ಅಂತಿಮ ಹಂತದ ಕಸರತ್ತು ಜೋರಾಗಿದೆ.
ನವೆಂಬರ್ 18 ಅಥವಾ 19 ರಂದು ಅಂತಿಮ ಪಟ್ಟಿ ಬಿಡುಗಡೆ ಆಗುವ ಸಾಧ್ಯತೆ ಇದೆ. ಡಿಸೆಂಬರ್ 14 ರಂದು ಚುನಾವಣೆಯ ಫಲಿತಾಂಶ ಹೊರಬೀಳಲಿದೆ.